ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಪ್ರಶಸ್ತಿ |ಕಂದಾಯ ಇಲಾಖೆ ಅಧಿಕಾರಿಗಳಿಂದ ಸನ್ಮಾನ
ಯಾದಗಿರಿ: ಲೋಕಸಭಾ ಚುನಾವಣೆ ಸಂದರ್ಭದಲ್ಲಿ ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗಳ ಸಮನ್ವಯತೆಯಿಂದ ಶ್ರಮಿಸಿದ ಫಲವಾಗಿ ಚುನಾವಣಾ ಆಯೋಗದಿಂದ ಈ ಪ್ರಶಸ್ತಿ ದೊರೆತಿದೆ ಎಂದು ಜಿಲ್ಲಾಧಿಕಾರಿ ಡಾ.ಸುಶೀಲ ಬಿ. ಅವರು ಹೇಳಿದರು.
ಜಿಲ್ಲಾಧಿಕಾರಿಗಳಿಗೆ ಚುನಾವಣಾ ಆಯೋಗದಿಂದ ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ ನಗರದ ಗ್ರೀನ್ ವ್ಯಾಲಿ ರೆಸಾರ್ಟದಲ್ಲಿಂದು ಕಂದಾಯ ಇಲಾಖೆಯಿಂದ ಏರ್ಪಡಿಸಲಾಗಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.
ಯಾವುದೇ ಚುನಾವಣೆಗಳ ಸಂದರ್ಭದಲ್ಲಿ ಅತ್ಯಂತ ಜಾಗರುಕರಾಗಿ ಕಾರ್ಯನಿರ್ವಹಿಸಬೇಕಾಗುತ್ತದೆ. ಮತದಾರರ ಕರಡು ಪಟ್ಟಿ ಪ್ರಕಟ ಕಾರ್ಯದಿಂದ ಮತ ಎಣಿಕೆವರೆಗೆ ಯಾವುದೇ ಲೋಪವಿ ಲ್ಲದೆ ಕಾರ್ಯ ನಿರ್ವಹಿಸಬೇಕಾಗುತ್ತದೆ. ಈ ಸಂದರ್ಭದಲ್ಲಿ ಕೆಳಮಟ್ಟದಿಂದ ಮೇಲಿನ ಅಧಿಕಾರಿಗಳ ವರೆಗೆ ಎಲ್ಲರೂ ಒಗ್ಗಟ್ಟಾಗಿ,ಒಂದು ತಂಡವಾಗಿ ಶ್ರಮಿಸಿದ ಫಲವಾಗಿ ಈ ಪ್ರಶಸ್ತಿ ಲಭಿಸಿದೆ ಎಂದು ಹೇಳಿದರು.
ಚುನಾವಣಾ ನಿಯಮಾವಳಿ ಗಳನ್ವಯ ಲೋಕಸಭಾ ಹಾಗೂ ಸುರಪುರ ಉಪಚುನಾವಣೆ ಯಶಸ್ವಿಯಾಗಿ ಕಾರ್ಯನಿರ್ವಹ ಣೆಗೆ ಶ್ರಮಿಸಿದ ಎಲ್ಲ ನೋಡಲ್ ಅಧಿಕಾರಿಗಳು, ಸಿಬ್ಬಂದಿಗಳು ಹಾಗೂ ಮಾಧ್ಯಮ ಸ್ನೇಹಿತರಿಗೆ ಧನ್ಯವಾದ ಹೇಳಿದ ಅವರು ಈ ಜಿಲ್ಲೆಯ ಸರ್ವಾಂಗೀಣ ಪ್ರಗತಿಗೂ ಶ್ರಮಿಸೋಣ ಎಂದು ಹೇಳಿದರು.
ಜಿ.ಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಲವೀಶ್ ಒರಡಿಯಾ ಹಾಗೂ ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಅವರು ಮಾತನಾಡಿ ವಿವಿಧ ಇಲಾಖೆಗಳಿಗೆ ಸಂಬಂಧಿಸಿದ ಪ್ರತಿಯೊಂದು ಕ್ಷೇತ್ರಕ್ಕೆ ವಿಶೇಷ ಗಮನವನ್ನು ಮಾನ್ಯ ಜಿಲ್ಲಾಧಿಕಾರಿಗಳು ನೀಡುತ್ತಿದ್ದು, ಚುನಾವಣಾ ಆಯೋಗದಿಂದ ಈ ಪ್ರಶಸ್ತಿಗೆ ಭಾಜನರಾಗಿರುವುದಕ್ಕೆ ಅಭಿನಂದನೆ ಸಲ್ಲಿಸಿದರು.
ಪ್ರಾಸ್ತಾವಿಕವಾಗಿ ಮಾತನಾಡಿ ದ ಅಪರ್ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರು, ಮಾತೃಹೃದಯಿ ಜಿಲ್ಲಾಧಿಕಾರಿಗಳು ಈ ಜಿಲ್ಲೆಗೆ ಲಭಿಸಿದ್ದಾರೆ.ಅವರು ಈ ಜಿಲ್ಲೆಗೆ ಬಂದಾಗಿನಿಂದ ಸಕಾಲ,ಭೂಮಿ, ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಪ್ರಗತಿ ಸಾಧಿಸಿದ್ದೇವೆ.ವ್ಯವಸ್ಥಿತವಾಗಿ ಚುನಾವಣೆ ನಡೆಸಲಾಗಿದೆ. ಮುಂದೆಯೂ ಹಿಂದುಳಿದ ಜಿಲ್ಲೆಯಾಗಿರುವ ಯಾದಗಿರಿಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಮಾರ್ಗದರ್ಶನ ಪಡೆದು ಮುನ್ನಡೆಯೋಣ ಎಂದು ಹಾರೈಸಿ, ಅತ್ಯುತ್ತಮ ಚುನಾವಣಾಧಿಕಾರಿ ಪ್ರಶಸ್ತಿ ಲಭಿಸಿರುವುದಕ್ಕೆ ಜಿಲ್ಲಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು.
ಕಾರ್ಯಕ್ರಮದಲ್ಲಿ ಸಹಾಯಕ ಆಯುಕ್ತ ಹಂಪಣ್ಣ ಸಜ್ಜನ್ ಅವರು ಮಾತನಾಡಿದರು.ವಿವಿಧ ಇಲಾಖೆ ಅಧಿಕಾರಿ ಮತ್ತು ಸಿಬ್ಬಂದಿಗಳಿಂದ ಮಾನ್ಯ ಜಿಲ್ಲಾಧಿಕಾರಿಗಳಿಗೆ ಸನ್ಮಾನಿಸಲಾಯಿತು.
