ಯಾದಗಿರಿಯಲ್ಲಿ ಬಿಜೆಪಿ ಪ್ರತಿಭಟನೆ | ಮಾಜಿ ಸಚಿವ ಎನ್ ಮಹೇಶ ಭಾಗಿ | ಸಾವಿರಾರು ಕೋಟಿ ಗ್ಯಾರಂಟಿ ಯೋಜನೆಗಳ ಅನುಷ್ಠಾನಕ್ಕೆ ದುರ್ಬಳಕೆಯಾಗಿದೆ ಎಂದ ಬಿಜೆಪಿ
ಯಾದಗಿರಿ: 2023 ರ ವಿಧಾನಸಭೆಯ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಹೇಗಾದರು ಮಾಡಿ ಅಧಿಕಾರ ಹಿಡಿಯಲು ಐದು ಗ್ಯಾರೆಂಟಿಗಳನ್ನು ಘೋಷಿಸಿತು. ಅದನ್ನು ಮತದಾರರಿಗೆ ನಂಬಿಸಲು ಹರಸಾಹಸ ನೆಡಸಿತು, ಆಗ ಕಾಂಗ್ರೆಸ್ ನ ಯಾವ ನಾಯಕರೂ ಗ್ಯಾರೆಂಟಿ ಯೋಜನೆಗಳ ಅನುಷ್ಠಾನಕ್ಕೆ ಎಸ್.ಸಿ.ಪಿ.ಟಿಎಸ್.ಪಿ ಹಣ ಬಳಸುವುದಾಗಿ ಹೇಳಿರಲಿಲ್ಲ ಎಂದು ಮಾಜಿ ಸಚಿವ ಎನ್ ಮಹೇಶ ಹೇಳಿದ್ದಾರೆ.
ಬಿಜೆಪಿ ಜಿಲ್ಲಾ ಘಟಕದಿಂದ ಹಮ್ಮಿಕೊಳ್ಳಲಾಗಿದ ಪ್ರತಿಭಟನೆ ಉದ್ದೇಶಿಸಿ ಮಾತನಾಡಿದ ಅವರು, ಅಧಿಕಾರ ಹಿಡಿದ ತರುವಾಯ ಅನುದಾನ 2023, 24 ರಲ್ಲಿ ಯೋಜನೆಗಳ ಅನುಷ್ಠಾನಕ್ಕೆ ದುರ್ಬಳಕೆ ಮಾಡಿಕೊಂಡಿದೆ ಎಂದು ಹರಿಹಾಯ್ದರು.
ಮೊದಲಸಲ ದಲಿತರ ಮೀಸಲು ನಿಧಿಗೆ ಅನೈತಿಕವಾಗಿ ಕೈ ಹಾಕುವಾಗ ಮುಖ್ಯಮಂತ್ರಿಗಳು ಹಿಂಜರಿಕೆ ತೋರ್ಪಡಿಸಿದ್ದರು. ಸಚಿವ ಸಂಪುಟ ಸಭೆಯಲ್ಲಿ ಸಮಾಜ ಕಲ್ಯಾಣ ಸಚಿವರೂ ಸೇರಿದಂತೆ ಕೆಲ ಸಚಿವರು ವಿರೋಧ ವ್ಯಕ್ತಪಡಿಸಿದ್ದರು, ಆದರೆ ಕೆಲವೇ ತಿಂಗಳಲ್ಲಿ ಸರ್ಕಾರ, ಸಂವೇದನೆ ಕಳೆದುಕೊಂಡಿದೆ.
ಗ್ಯಾರೆಂಟಿ ಯೋಜನೆಗಳ ಫಲಾನುಭವಿಗಳಲ್ಲಿ ಕೇವಲ ಪರಿಶಿಷ್ಟ ಜಾತಿ, ಪಂಗಡದವರು ಮಾತ್ರ ಇಲ್ಲ, ಸವರ್ಣೀಯರು, ಹಿಂದುಳಿದವರು, ಅಲ್ಪಸಂಖ್ಯಾತರು ಎಲ್ಲರೂ ಇದ್ದಾರೆ. ಉಳಿದವರಿಗೆಲ್ಲ ಸರ್ಕಾರ ತನ್ನ ಖಜಾನೆಯಿಂದ ಹಣ ಕೊಡುತ್ತದೆ. ಆದರೆ ಎಸ್ಸಿ, ಎಸ್ಟಿ ಮಂದಿಗೆ ‘ದಲಿತರ ಮೀಸಲು ನಿಧಿ’ ಗೆ ಕನ್ನ ಹಾಕುತ್ತದೆ ಎಂದರೆ ಇದನ್ನು ಸಾಮಾಜಿಕ ನ್ಯಾಯ ಎನ್ನಲು ಸಾಧ್ಯವೇ ಎಂದು ಪ್ರಶ್ನಿಸಿದರು.
ಅಲ್ಪಸಂಖ್ಯಾತರಿಗೆಂದೇ ಬಜೆಟ್ ನಲ್ಲಿ ಪ್ರತ್ಯೇಕ ಸಾವಿರಾರು ಕೋಟಿ ತೆಗೆದಿರಿಸಲಾಗಿದೆ. ಆದರೆ ಸರ್ಕಾರ ಗ್ಯಾರೆಂಟಿ ಯೋಜನೆ ಆನುಷ್ಟಾನಕ್ಕೆ ಆ ಹಣ ಮುಟ್ಟುವುದಿಲ್ಲ ಸರ್ಕಾರಿ ಖಜನೆಯಿಂದಲೇ ಹಣ ಪೂರೈಸುತ್ತದೆ ಎಂದು ತಿಳಿಸಿದರು.
ರಾಜ್ಯದ ಎಲ್ಲಾ ನಿಗಮಗಳು ಸರ್ಕಾರದ ಹಣಕಾಸಿನ ನೆರವಿಲ್ಲದೆ ಸೋರಗಿವೆ. ಯಾವ ನಿಗಮದಲ್ಲಿಯೂ ಯಾವ ಯೋಜನೆಯೂ ಜಾರಿಯಾಗುತ್ತಿಲ್ಲ. ಸಾರಿಗೆ ಸಂಬಳಕ್ಕೂ ಕಾಸಿಲ್ಲದಾಗಿ ಎಂದರು.
ಈ ಸಂದರ್ಭದಲ್ಲಿ ಜಿಲ್ಲಾ ಅಧ್ಯಕ್ಷ ಬಸವರಾಜ ವಿಭೂತಿಹಳ್ಳಿ ಮಾತನಾಡಿ, ಸರ್ಕಾರ ಈಗಾಗಲೇ ತನ್ನ ಐದು ಗ್ಯಾರೆಂಟಿಗಳಿಗೆ ಸಂಬಂಧಿಸಿದಂತೆ ದಲಿತರ ಮೀಸಲು ನಿಧಿಗೆ ಕನ್ನ ಹಾಕಲು ಪ್ರಸ್ತಾವನೆ ಸಿದ್ದಪಡಿಸಿದೆ.
ಸರ್ಕಾರದ ಈ ಬೇಜವಾಬ್ದಾರಿ, ದಲಿತ ವಿರೋಧಿ ನೀತಿಯನ್ನು ನಾವು ಒಪ್ಪುವುದಿಲ್ಲ ಸದನದ ಹೊರಗೆ ಮತ್ತು ಒಳಗೆ ನಾವು ಗಂಭೀರ ಹೋರಾಟ ಮಾಡುತ್ತೇವೆ. ಅದಕ್ಕಾಗಿ ಜಿಲ್ಲೆಯಲ್ಲಿ ಜನಾಂದೋಲನ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ರಾಜ್ಯ ಕಾರ್ಯದರ್ಶಿ ಮತ್ತು ನಗರಸಭೆ ಅಧ್ಯಕ್ಷೆ ಕ.ಲಲಿತಾ ಅನಪುರ ಮಾತನಾಡಿ, ಪರಿಶಿಷ್ಟರ ಶ್ರೇಯೋಭಿವೃದ್ಧಿಗೆ ಮೀಸಲಾಗಿರುವ ಹಣವನ್ನು ಸರಿಯಾದ ರೀತಿಯಲ್ಲಿ ಬಳಸಿದಾಗ ಮಾತ್ರ ಅವರು ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕವಾಗಿ ಮುನ್ನಡೆಯಲು ಸಾಧ್ಯ. ಈ ಸಮುದಾಯ ಗಳ ಅಭಿವೃದ್ಧಿಗೆ ಕೈಜೋಡಿಸಿದಾಗ ಸಮತೋಲನವಾದ ಮತ್ತು ನ್ಯಾಯಸಮ್ಮತ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಯುವ ಮುಖಂಡ ಮಹೇಶರಡ್ಡಿ ಮುದ್ನಾಳ, ನಿಗಮದ ಮಾಜಿ ಅಧ್ಯಕ್ಷ ದೇವಿಂದ್ರನಾಥ ನಾದ, ನಿಕಟಪೂರ್ವ ಜಿಲ್ಲಾಧ್ಯಕ್ಷ ಅಮೀನರಡ್ಡಿ ಯಾಳಗಿ, ದೇವರಾಜ ನಾಯಕ ಮಾತನಾಡಿದರು.
ಈ ಸಂದರ್ಭದಲ್ಲಿ ಹಿರಿಯ ಮುಖಂಡೆ ನಾಗರತ್ನ ಕುಪ್ಪಿ, ಖಂಡಪ್ಪ ದಾಸನ, ಗುರು ಕಾಮ, ಮೇಲಪ್ಪ ಗುಳಗಿ, ಪರುಶುರಾಮ ಕುರಕುಂದಿ, ಹಣಮಂತ ಇಟಗಿ, ಸಿದ್ದಣ್ಣಗೌಡ ಕಾಡಂನೊರ, ಶರಣುಗೌಡ ಐಕೂರ, ಬಸವರಾಜ ಸೋನ್ನದ, ಅಡಿವೆಪ್ಪ ಜಾಕ, ಪರ್ವತರಡ್ಡಿ ಬೆಂಡಗುಂಬಳಿ, ಮಲ್ಲಿಕಾರ್ಜುನ ಹೊನಿಗೇರಿ,ಎಸ್, ಟಿ ಮೋರ್ಚಾ ಜಿಲ್ಲಾಧ್ಯಕ್ಷ ಚಂದಪ್ಪ ಕಾವಲಿ ರಾಮಸಮುದ್ರ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸುನಿತಾ ಚೌವ್ಹಾಣ್, ಸಿದ್ದಲಿಂಗಪ್ಪ ನಾಯಕ, ನಗರಸಭೆ ಉಪಾಧ್ಯಕ್ಷೆ ರುಕೀಯ ಬೇಗಂ, ಗುರುಮಠಕಲ್ ಮಂಡಲ ಅಧ್ಯಕ್ಷ ನರಸಿಂಹಲು ನೀರೆಟ್ಟಿ, ಯಾದಗಿರಿ ಗ್ರಾಮೀಣ ಮಂಡಲ ಅಧ್ಯಕ್ಷ ರಾಜಶೇಖರ್ ಕಾಡಂನೊರ, ನಗರ ಮಂಡಲ ಅಧ್ಯಕ್ಷ ಲಿಂಗಪ್ಪ ಹತ್ತಿಮನಿ, ಸಂಗಣ್ಣ ವೈಲಿ, ಜಿಲ್ಲಾ ಪದಾಧಿಕಾರಿಗಳ ಆರು ಮಂಡಲ ಪದಾಧಿಕಾರಿಗಳ ಸೇರಿದಂತೆ ಅನೇಕರು ಕಾರ್ಯಕರ್ತರು ಉಪಸ್ಥಿತರಿದ್ದರು.
