ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆಯಲ್ಲಿ ಮಾನ್ಯ ಮುಖ್ಯಮಂತ್ರಿಗಳಿಂದ ಸೂಕ್ತ ನಿರ್ದೇಶನ ಹಿನ್ನೆಲೆ |  ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಡಿಸಿ

ಯಾದಗಿರಿ: ಜಿಲ್ಲೆಯಲ್ಲಿ ಎಸ್.ಎಸ್.ಎಲ್.ಸಿ ಹಾಗೂ ಪಿಯುಸಿ ಪರೀಕ್ಷಾ ಫಲಿತಾಂಶ ಹೆಚ್ಚಳಕ್ಕೆ. ಶಾಲಾ -ಕಾಲೇಜು ಆರಂಭದ ದಿನಗಳಿಂದಲೇ ಯೋಜನೆ ರೂಪಿಸುವಂತೆ ಜಿಲ್ಲಾಧಿಕಾರಿ ಡಾ.ಸುಶೀಲ.ಬಿ.ಅವರು ಸೂಚಿಸಿದರು.

ಇತ್ತೇಚೆಗೆ ಮಾನ್ಯ ಮುಖ್ಯಮಂತ್ರಿಗಳು ಜಿಲ್ಲಾಧಿಕಾರಿಗಳು ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾ ಧಿಕಾರಿಗಳ ಸಭೆ ನಡೆಸಿ ಸೂಕ್ತ ನಿರ್ದೇಶನ ನೀಡಿದ ಪ್ರಯುಕ್ತ, ಈ ಕುರಿತು ಚರ್ಚಿಸಲು ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಕರೆಯಲಾಗಿದ್ದ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗಿನ ಸಭೆಯಲ್ಲಿ ಅವರು ಮಾತನಾಡಿದರು.

ಸರ್ಕಾರಿ ಶಾಲೆಗಳಲ್ಲಿ ಎಸ್.ಎಸ್.ಎಲ್.ಸಿ ಹಾಗೂ ದ್ವಿತೀಯ ಪಿಯುಸಿ ಫಲಿತಾಂಶ ಚೆನ್ನಾಗಿ ಮಾಡಬಹುದಾಗಿದ್ದು,ಡಿಡಿಪಿಐ ಹಾಗೂ ಡಿಡಿಪಿಯು ಶಾಲಾ ಕಾಲೇಜು ಆರಂಭದಿಂದಲೇ ಈ ಕುರಿತು ನಿಗಾವಹಿಸಿ ಸೂಕ್ತ ಯೋಜನೆ ರೂಪಿಸಬೇಕು. ನಿರಂತರ ಪರಿಶೀಲನೆ ನಡೆಸಬೇಕು. ತಾಲೂಕುವಾರು ಪೋಷಕರು, ಎಸ್ಡಿಎಂಸಿ, ಶಿಕ್ಷಕರುಗಳ ಸಭೆ ನಡೆಸಿ,ಡ್ರಾಪ್ ಔಟ್ ಮಕ್ಕಳನ್ನು ಪುನಃಸೇರ್ಪಡೆ, ಗುಣಮಟ್ಟದ ಶಿಕ್ಷಣ, ಮೂಲಸೌಕರ್ಯಗಳ ಉತ್ತಮ ಬಳಕೆಯೊಂದಿಗೆ ಮುಂದಿನ ವರ್ಷಗಳಲ್ಲಿ ಫಲಿತಾಂಶ ಸುಧಾರಣೆಗೆ ವಿಶೇಷ ಗಮನ ನೀಡುವಂತೆ ಸೂಚಿಸಿದರು.

ಜಿಲ್ಲೆಯಲ್ಲಿ ಪ್ರತಿಶತ 60 ಕ್ಕಿಂತ ಕಡಿಮೆ ಫಲಿತಾಂಶ ಬಂದಕಡೆ ನೋಟಿಸ್ ಸಹ ಜಾರಿಗೊಳಿಸಲಾಗುವುದು. ಕಳೆದ ಎಸ್.ಎಸ್.ಎಲ್.ಸಿ ಸುಧಾರಣೆಗೆ ಡಿಡಿಪಿಐ ಕೈಗೊಂಡಿರುವ ಕ್ರಮಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು ಮುಂದಿನ ದಿನಗಳಲ್ಲಿ ಸವಾಲಾಗಿ ಸ್ವೀಕರಿಸಿ, ಫಲಿತಾಂಶ ಹೆಚ್ಚಳಕ್ಕೆ ವಿಶೇಷ ಗಮನ ನೀಡುವಂತೆ ಸಲಹೆ ನೀಡಿದರು.

ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ ಕಳಪೆ ಬೀಜ , ರಸಗೊಬ್ಬರ ಮಾರಾಟವಾಗದಂತೆ ನಿಗಾವಹಿಸಬೇಕು. ಕೃಷಿಗೆ ಸಂಬಂಧಿಸಿದ ಚಟುವಟಿಕೆಗಳ ಬಗ್ಗೆ ಗಂಭೀರವಾಗಿರಬೇಕು. ಡಿಎಪಿ (ಡೈ ಅಮೋನಿಯಂ ಪಾಸ್ಫೇಟ್) ರಸಗೊಬ್ಬರ ಬದಲಾಗಿ *ಎನ್ ಪಿ ಕೆ*( ಸಂಯುಕ್ತ ರಸಗೊಬ್ಬರ) ಬಳಸುವ ಬಗ್ಗೆ. ರೈತರಿಗೆ ತಿಳಿಹೇಳಬೇಕು. ವಿವಿಧ ಇಲಾಖೆಗಳ ವ್ಯಾಪ್ತಿಯಲ್ಲಿ ಅಂಗನವಾಡಿಗಳು ಸೇರಿದಂತೆ ವಿವಿಧ ನಿವೇಶನದ ಅವಶ್ಯಕತೆಗಳ ಬಗ್ಗೆ ವರದಿ ಸಲ್ಲಿಸಬೇಕು ಎಂದು ಸೂಚಿಸಿದರು.

ಜಿಲ್ಲೆಯಲ್ಲಿ ಬಾಲ್ಯವಿವಾಹ ತಡೆಯಲು ಗ್ರಾಮವಾರು ಆಯಾ ಪೋಷಕರು, ಮಕ್ಕಳು, ಗ್ರಾಮಸ್ಥರಲ್ಲಿ ಸೂಕ್ತ ಅರಿವು ಮೂಡಿಸಬೇಕು. ಆರೋಗ್ಯಾಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು, ಜಿಲ್ಲಾ ಆರ್ ಸಿ ಹೆಚ್ ಅಧಿಕಾರಿಗಳು ಆಶಾ ಕಾರ್ಯಕರ್ತೆಯರ ಸಮನ್ವಯತೆಯಿಂದ ತಾಯಿ ಮರಣ,ಶಿಶುಮರಣ ಪ್ರಮಾಣ ತಗ್ಗಿಸಲು ಪ್ರಯತ್ನಿಸಬೇಕು. ಅಪೌಷ್ಟಿಕ ನಿವಾರಣೆಗೆ ಸೂಕ್ತ ನಿಗಾಯಿಡುವಂತೆ ಸೂಚಿಸಿದರು.

ಸಮಾಜ ಕಲ್ಯಾಣ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ವಿವಿಧ ನಿಗಮಗಳ ವ್ಯಾಪ್ತಿಯಲ್ಲಿ ಅವಶ್ಯಕ ಕ್ರಮಗಳನ್ನು ಕೈಗೊಳ್ಳಬೇಕು. ನಗರಸ್ಥಳಿಯ ಹಾಗೂ ಗ್ರಾ.ಪಂ. ವ್ಯಾಪ್ತಿಯಲ್ಲಿ ಅಭಿಯಾನ ರೂಪದಲ್ಲಿ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಚರಂಡಿ ನೀರು ಹರಿದು ಹೋಗುವಂತೆ ನೋಡಿಕೊಳ್ಳಬೇಕು. ವಸತಿ ಯೋಜನೆಗಳನ್ನು ಪರಿಣಾಮಕಾರಿಯಾಗಿ ಹಮ್ಮಿಕೊಳ್ಳಬೇಕು ಎಂದು ಸೂಚಿಸಿದರು.

ಪ್ರವಾಹ ಸಂಭವ ಹಿನ್ನೆಲೆಯಲ್ಲಿ ಅಧಿಕಾರಿಗಳು ಅನುಮತಿ ಇಲ್ಲದೆ ಕೇಂದ್ರ ಸ್ಥಾನ ಬಿಡಬಾರದು. ನೋಡಲ್ ಅಧಿಕಾರಿಗಳು ಸೂಕ್ತ ಮುನ್ನೆಚ್ಚರಿಕೆ ಗಳ ಬಗ್ಗೆ ಆಯಾ ಗ್ರಾಮ ವ್ಯಾಪ್ತಿಯಲ್ಲಿ ತಿಳಿ ಹೇಳಬೇಕು. ವಿವಿಧ ಸಮೂಹ ಮಾಧ್ಯಮ ಗಳಲ್ಲಿ ಬರುವಂತಹ ಸಾರ್ವಜನಿಕರ ಕುಂದುಕೊರತೆಗಳ ಬಗ್ಗೆ ಕಾಲ ಕಾಲಕ್ಕೆ ಕ್ರಮ ಕೈಗೊಂಡು ಸಮನ್ವಯ ಸಾಧಿಸಿ ಸಮಸ್ಯೆ ಪರಿಹರಿಸಲು ಸೂಕ್ತ ಕ್ರಮ ಕೈಗೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.

ಸಭೆಯಲ್ಲಿ ಜಿ.ಪಂ ಸಿಇಓ ಲವೀಶ್ ಒರಡಿಯಾ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರಣೇಶ್ ಎಸ್.ಪಿ. ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

Spread the love

Leave a Reply

Your email address will not be published. Required fields are marked *

error: Content is protected !!