ಮುಂಬರುವ ಅತಿವೃಷ್ಟಿ ಹಾಗೂ ನೆರೆಹಾವಳಿಯಂತಹ ಪರಿಸ್ಥಿತಿ ನಿಭಾಯಿಸಲು | ಈಗಿನಿಂದಲೇ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ | ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಸೂಚನೆ
ಯಾದಗಿರಿ: ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಾಗೂ ನೆರೆಹಾವಳಿಯಂತಹ ಸಂದರ್ಭವನ್ನು ಎದುರಿಸುವ ಬಗ್ಗೆ ಈಗಿನಿಂದಲೇ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೋಳ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಇಂದು ಮುಂಬರುವ ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ಹಾನಿ ಕುರಿತು ಮುನ್ನೆಚ್ಚರಿಕಾ ಕ್ರಮ ಹಾಗೂ ಜಿಲ್ಲಾ ಮಟ್ಟದ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಮುಂಗಾರು ಹಂಗಾಮಿನಲ್ಲಿ ಅತಿವೃಷ್ಟಿ ಹಾಗೂ ನೆರೆ ಹಾವಳಿಯಂತಹ ಪರಿಸ್ಥಿತಿ ಎದುರಿಸಲು ಈಗಿನಿಂದಲೇ ಅಧಿಕಾರಿಗಳು ಸನ್ನದ್ಧರಾಗಬೇಕು. ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿನ ಚರಂಡಿ ಸ್ವಚ್ಛತೆಗೆ ವಿಶೇಷ ಗಮನ ನೀಡಬೇಕು.ತಗ್ಗು ಪ್ರದೇಶಗಳಲ್ಲಿ ಚರಂಡಿ
ನೀರು ಸರಾಗವಾಗಿ ಹರಿದು ಹೋಗುವ ಬಗ್ಗೆ ಕ್ರಮ ಕೈಗೊಳ್ಳಬೇಕು. ತೀವ್ರ ಮಳೆಗಾಲ, ಗಾಳಿಯಿಂದ ಬೀಳುವ ಹಂತದಲ್ಲಿರುವ ಗಿಡಮರಗಳ ತೆರವು ಮೂಲಕ ಪ್ರಾಣಹಾನಿ ತಡೆಯುವ ಮತ್ತು ವಾಹನಗಳ ಸಂಚಾರ ದಟ್ಟಣೆ ಯಾಗದಂತೆ ನಿಗಾವಹಿಸುವ ಬಗ್ಗೆ ಮುಂಚಿತವಾಗಿ ಸಮೀಕ್ಷೆ ನಡೆಸಿ ತೆರವು ಕಾರ್ಯಾಚರಣೆ ನಡೆಸುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕು.
ತಾಲೂಕ ಮಟ್ಟದಲ್ಲಿ ತಹಸಿಲ್ದಾರರು, ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಅಭಿವೃದ್ಧಿ ಪಂಚಾಯತ್ ರಾಜ್, ಲೋಕೋಪಯೋಗಿ ಇಲಾಖೆ ಅಧಿಕಾರಿಗಳನ್ನು ಒಳಗೊಂಡ ಸಮಿತಿ, ತಾಲೂಕ ಮಟ್ಟದ ತಂಡಗಳನ್ನೂ ರಚಿಸಿ ಸಮನ್ವಯತೆ ಸಾಧಿಸಿ ಕೈಗೊಂಡ ಕ್ರಮದ ಬಗ್ಗೆ ವರದಿ ಸಲ್ಲಿಸಬೇಕು.
ಅದರಂತೆ ಜಿಲ್ಲೆಯ ವಿವಿಧ ಕೆರೆಗಳ ವ್ಯಾಪ್ತಿಯಲ್ಲಿ ಬಂಡ್ಗಳ ದುರಸ್ತಿ ಹಾಗೂ ನಿರ್ವಹಣೆ ಕುರಿತು ವಸ್ತುಸ್ಥಿತಿ ಪರಿಸ್ಥಿತಿ ಪರಿಶೀಲಿಸಬೇಕು. ಕೈಗೊಂಡ ಕ್ರಮದ ಹಾಗೂ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಮೂರು ದಿನಗಳಲ್ಲಿ ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ವರದಿ ಸಲ್ಲಿಸಬೇಕು.
ಜಲಾಶಯ ಮತ್ತು ಸೇತುವೆ ವ್ಯಾಪ್ತಿಯಲ್ಲಿ ಪೂರ್ವಭಾವಿಯಾಗಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಹಾಗೂ ಮುಂಬರುವ ಸಂದರ್ಭ ಎದುರಿಸಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಈಗಿನಿಂದಲೇ ಪರಿಶೀಲಿಸಿ ವರದಿಯನ್ನು ಬೃಹತ್ ನೀರಾವರಿ ಇಲಾಖೆ ಅಧಿಕಾರಿಗಳು ಸಲ್ಲಿಸಬೇಕು ಎಂದು ಸೂಚಿಸಿದರು.
ಅದರಂತೆ ವಿದ್ಯುತ್ ಅವಘಡ ನಿಯಂತ್ರಣ, ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಆಗಬಹುದಾದ ರಸ್ತೆ ಸಂಪರ್ಕ ಕಡಿತ ಬಗ್ಗೆಯೂ ಈಗಿನಿಂದಲೇ ಅಧ್ಯಯನ ನಡೆಸಿ ಪೂರ್ವ ತಯಾರಿ ಮಾಡಿಕೊಳ್ಳಬೇಕು. ನೆರೆಹಾವಳಿ ಸಂದರ್ಭ ಎದುರಿಸಲು ನೋಡಲ್ ಅಧಿಕಾರಿಗಳನ್ನು ನೇಮಿಸಲಾಗುವುದು. ಕಾಳಜಿ ಕೇಂದ್ರ ಸ್ಥಾಪನೆ ನಿರ್ವಹಣೆ ಹಾಗೂ ನೆರೆಯಿಂದ ಭಾಧಿತವಾಗುವ ಗ್ರಾಮಗಳ ಬಗ್ಗೆ , ಈ ಹಿಂದೆ ಭಾದೀತವಾಗಿದ್ದ ಗ್ರಾಮಗಳ ಬಗ್ಗೆ ಅಧ್ಯಯನ ನಡೆಸಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮಗಳ ಬಗ್ಗೆ ಯೋಜನೆ ರೂಪಿಸಿ
ವರದಿ ಸಲ್ಲಿಸುವಂತೆ ಸೂಚನೆ ನೀಡಿದ ಅವರು ಈಗಾಗಲೇ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ 24*7 ಸಹಾಯವಾಣಿ ಕೇಂದ್ರ ಆರಂಭಿಸಲಾಗಿದೆ. ಸಾರ್ವಜನಿಕರ ಅನುಕೂಲಕ್ಕಾಗಿ ಸಹಾಯವಾಣಿ ಸಂ.08473-253950 ಆರಂಭಿಸಲಾಗಿದ್ದು, ತಾಲೂಕು ಕೇಂದ್ರಗಳಲ್ಲಿಯೂ ಸಹಾಯವಾಣಿ ಸ್ಥಾಪಿಸಿ, ಸಿಬ್ಬಂದಿಗಳನ್ನು ನಿಯೋಜಿಸಿ ಅನುಪಾಲನಾ ವರದಿ ಸಲ್ಲಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ನೆರೆಹಾವಳಿಯಂತಹ ಪರಿಸ್ಥಿತಿ ಉದ್ಭವಿಸಿದಲ್ಲಿ ಕಾಳಜಿ ಕೇಂದ್ರಗಳಲ್ಲಿ ಸಮರ್ಪಕ ಶುದ್ಧ ನೀರು ಪೂರೈಕೆ, ನುರಿತ ವೈದ್ಯರು, ಔಷಧಿ ಇರುವಂತೆ ನೋಡಿಕೊಳ್ಳಬೇಕಾಗುತ್ತದೆ. ಅವಶ್ಯಕತೆ ಸಂದರ್ಭಗಳಲ್ಲಿ ಜನರ ಸ್ಥಳಾಂತರಕ್ಕೆ ಬಸ್ಸುಗಳ ವ್ಯವಸ್ಥೆ, ಇರುವ ಬಗ್ಗೆ ಸಿದ್ಧತೆ ಮಾಡಿಕೊಳ್ಳಬೇಕು. ಸಿಡಿಲು ದಿಂದ ಆಗುವ ಅನಾಹುತಗಳ ಬಗ್ಗೆ ಪೂರ್ವಭಾವಿಯಾಗಿ ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕು.
ಮನೆಹಾನಿ ಹಾಗೂ ಬೆಳೆಹಾನಿಗಳ ಬಗ್ಗೆಯೂ ನೈಜ ವರದಿ ಸಲ್ಲಿಸುವಂತಾಗಬೇಕು.ಒಟ್ಟಾರೆ ಮುಂದಿನ ದಿನಗಳಲ್ಲಿ ಅತಿವೃಷ್ಟಿ ಮತ್ತು ನೆರೆಹಾವಳಿ ಯಂತಹ ಪರಿಸ್ಥಿತಿಗಳನ್ನು ಎದುರಿಸುವ ಬಗ್ಗೆ ಯೋಜನಾಬದ್ಧವಾಗಿ ಕಾರ್ಯನಿರ್ವಹಿಸಲು ಸನ್ನದ್ಧರಾಗಿರುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ವಿಜಯಕುಮಾರ್ ಮಡ್ಡೆ, ತಹಸೀಲ್ದಾರರು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.
