ಯಾದಗಿರಿ: ಚಿತ್ತಾಪುರ ಮತಕ್ಷೇತ್ರದ ಮುತ್ತಗಾ ಗ್ರಾಮದಲ್ಲಿ ನಿಜಶರಣ ಅಂಬಿಗರ ಚೌಡಯ್ಯ ಪ್ರತಿಮೆಯನ್ನು ದುಷ್ಕರ್ಮಿಗಳು ವಿರೂಪಗೊಳಿಸಿರುವ ಹೇಯ ಕೃತ್ಯವನ್ನು ಆಲ್ ಇಂಡಿಯಾ ಬಹುಜನ ಸಮಾಜ ಪಾರ್ಟಿ ಗುರುಮಠಕಲ್ ತಾಲೂಕು ಅಧ್ಯಕ್ಷ ಮಹದೇವಪ್ಪ ಖಂಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, ಅಂಬಿಗರ ಚೌಡಯ್ಯನವರು 12ನೇ ಶತಮಾನದಲ್ಲಿ ವಚನ ಕ್ರಾಂತಿಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಸಾಮಾಜಿಕ ಪ್ರಜ್ಞೆಯನ್ನು ಜಾಗೃತಗೊಳಿಸಿದ ಬಸವಣ್ಣನವರ ಅನುಯಾಯಿ ಶರಣರು.
ಸಾವಿರಾರು ವರ್ಷಗಳಿಂದ ಜನ ಸಮೂಹದಲ್ಲಿದ್ದ ಮೂಢನಂಬಿಕೆಗಳ ವಿರುದ್ಧ ಅರಿವು ಮೂಡಿಸಿದ ಮಹಾ ಜ್ಞಾನಿ. ಸಮಾಜದಲ್ಲಿನ ಮೌಢ್ಯದ ಅಂಧಕಾರವನ್ನು ಅಳಿಸಿ, ಚಿಂತನೆಯ ಬೆಳಕು ಹೊತ್ತಿಸುವಲ್ಲಿ ಅಂಬಿಗರ ಚೌಡಯ್ಯ ಅವರ ಪಾತ್ರ ಹಿರಿದು. ಅವರ ವಚನಗಳು ನಮ್ಮಲ್ಲಿ ವಿಚಾರವಂತಿಕೆ ಮೂಡಿಸುತ್ತದೆ.
ಆದರೆ ವಿಕೃತ ಮನಸ್ಥಿತಿಯ ಕೆಲವರು ಮಹಾನ್ ವಚನಕಾರರ ಪ್ರತಿಮೆಯನ್ನು ವಿರೂಪಗೊಳಿಸಿರುವುದು ನಮ್ಮ ಭವ್ಯ ಪರಂಪರೆಗೆ ಮಾಡಿರುವ ಅಪಮಾನ. ಈ ಕೃತ್ಯದಲ್ಲಿ ಯಾರೇ ಭಾಗಿಯಾಗಿದ್ದರೂ ಅವರಿಗೆ ಕಾನೂನು ಅಡಿಯಲ್ಲಿ ಕಠಿಣ ಶಿಕ್ಷೆಯಾಗಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
